Wednesday, November 9, 2022

ಪ್ರಜಾವಾಣಿಯ ಕನ್ನಡ ಧ್ವನಿಯಲ್ಲಿ ‘ಗ್ರಂಥಾಲಯ: ಸಾರ್ವಜನಿಕರ ಕೊರತೆಯೇಕೆ?’ ಲೇಖನವನ್ನು ಕೇಳಿ

ದಿನಾಂಕ 07.11.2022 ರಂದು ಪ್ರಜಾವಾಣಿ ಪತ್ರಿಕೆಯ ‘ಸಂಗತ’ ಅಂಕಣದಲ್ಲಿ ನನ್ನ ‘ಗ್ರಂಥಾಲಯ: ಸಾರ್ವಜನಿಕರ ಕೊರತೆಯೇಕೆ?’ ಲೇಖನ ಪ್ರಕಟವಾಯಿತು. ಅದೇ ದಿನ ಪ್ರಜಾವಾಣಿಯ ಕನ್ನಡ ಧ್ವನಿಯಲ್ಲಿ ಲೇಖನ ಬಿತ್ತರವಾಯಿತು.ಕೇಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

Saturday, November 5, 2022

ಸಾವು: ಮಾರಾಟಕ್ಕಿಟ್ಟ ಸರಕು?


                                


 (ಪ್ರಜಾವಾಣಿ 08.09.2022)

 


     ಪ್ರತಿಯೊಬ್ಬರ ಬದುಕಿನಲ್ಲಿ ಲೋಕಾಂತ ಮತ್ತು ಏಕಾಂತಗಳೆಂಬ ಎರಡು ಪ್ರದೇಶಗಳಿರುತ್ತವೆ ಎಂದಿದ್ದಾರೆ ತಿಳಿದವರು. ಸದಾಕಾಲ ಲೋಕಾಂತದಲ್ಲೇ ಬದುಕುತ್ತಿರುವ ಮನುಷ್ಯನಿಗೆ ಏಕಾಂತವನ್ನು ಪ್ರವೇಶಿಸುವಷ್ಟು ತಾಳ್ಮೆಯಾಗಲಿ ಮತ್ತು ಪುರುಸೊತ್ತಾಗಲಿ ಇಲ್ಲ. ಇಂದಿನ ವೈಭವದ ಆಧುನಿಕ ಜೀವನಶೈಲಿಯಿಂದಾಗಿ ನಿಶ್ಯಬ್ದ ಮತ್ತು ನೀರವ ವಾತಾವರಣದಲ್ಲಿ ಒಬ್ಬಂಟಿಯಾಗಿ ಕುಳಿತು ಮನಸ್ಸನ್ನು ನಿಗ್ರಹಿಸಿಕೊಳ್ಳುತ್ತ ಏಕಾಂತವನ್ನು ಹೊಕ್ಕು ತನ್ನ ವರ್ತನೆಯನ್ನು ವಿಮರ್ಶಿಸಿಕೊಳ್ಳುವ ಆತ್ಮಾವಲೋಕನದ ಗುಣವನ್ನು ಮನುಷ್ಯ ಕಳೆದುಕೊಂಡಿರುವನು. ಆತ್ಮಪರೀಕ್ಷೆ, ಆತ್ಮವಿಮರ್ಶೆಗೆ ಇವತ್ತು ಮನುಷ್ಯ ಒಳಗಾಗುತ್ತಿಲ್ಲ. ಸಮಾಜದಲ್ಲಿ ಕ್ರೌರ್ಯ ಮತ್ತು ಹಿಂಸೆ ವಿಜೃಂಭಿಸುತ್ತಿವೆ. ಅದಕ್ಕೆಂದೆ ಇಲ್ಲಿ ಸಾವು ಕೂಡ ಮಾರುಕಟ್ಟೆಯಲ್ಲಿ ಮಾರಾಟಕ್ಕಿಟ್ಟ ಸರಕಿನಂತೆ ಗೋಚರಿಸುತ್ತಿದೆ.

ಇತ್ತೀಚೆಗೆ ಒಂದು ವಾರದ ಅವಧಿಯಲ್ಲಿ ನನ್ನ ಅನುಭವಕ್ಕೆ ಬಂದ ಎರಡು ಪ್ರಸಂಗಗಳು ಇದನ್ನು ಸಾಕ್ಷೀಕರಿಸುವಂತಿವೆ. ಬೆಳಗ್ಗಿನ ವಾಕಿಂಗ್‍ನಲ್ಲಿ ಆಗಾಗ ಭೇಟಿಯಾಗುವ ಪರಿಚಯದ ಹಿರಿಯರೊಬ್ಬರು ಇತ್ತೀಚೆಗೆ ಹದಿನೈದು ದಿನಗಳಿಂದ ಕಾಣಿಸದೆಯಿದ್ದವರು ಮೊನ್ನೆ ಧಿಡೀರೆಂದು ಪ್ರತ್ಯಕ್ಷರಾದರು. ಹದಿನೈದು ದಿನಗಳ ಅವರ ಅನುಪಸ್ಥಿತಿಗೆ ಕಾರಣ ಕೇಳಿದಾಗ ಅವರು ಹೇಳಿದ್ದಿಷ್ಟು-‘ಎರಡು ವಾರಗಳ ಹಿಂದೆ ಇದ್ದಕ್ಕಿದ್ದಂತೆ ಕಾಯಿಲೆಯಿಂದ ಆರೋಗ್ಯದಲ್ಲಿ ಏರುಪೇರಾಗಿ ಸಾವಿನ ಭಯ ಮನಸ್ಸನ್ನು ಆವರಿಸಿತು. ಬದುಕಿನಲ್ಲಿ ಇನ್ನು ಅನುಭವಿಸಬೇಕಾದದ್ದು ಸಾಕಷ್ಟಿದೆ. ಸಾವಿನ ಭೀತಿಯಿಂದ ಪಾರಾಗಲು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಿ ಕಾಣಿಕೆ ಸಮರ್ಪಿಸಿದೆ. ತಿಮ್ಮಪ್ಪನಿಗೆ ಕಿರೀಟ, ಹನುಮಪ್ಪನಿಗೆ ಗದೆ, ಫಕೀರಪ್ಪನಿಗೆ ಹೂವಿನ ಬುಟ್ಟಿ, ಮಾರಮ್ಮನಿಗೆ ಸೀರೆ ಸಲ್ಲಿಸಿ ಮನೆಯಲ್ಲಿ ಹೋಮ ಹವನಗಳನ್ನು ಮಾಡಿದ್ದಾಯಿತು. ಜೊತೆಗೆ ಆಸ್ಪತ್ರೆಯ ಖರ್ಚು ಬೇರೆ. ಲಕ್ಷಾಂತರ ರೂಪಾಯಿಗಳು ಕೈಬಿಟ್ಟು ಹೋದರೂ ಚಿಂತೆಯಿಲ್ಲ ಸಾವಿನ ಭಯ ಈಗ ದೂರಾಗಿದೆ’.

ಈ ಮೇಲಿನ ಘಟನೆಗೆ ಭಿನ್ನವಾದ ಘಟನೆಯೊಂದು ಸರಿಸುಮಾರು ಇದೇ ಸಂದರ್ಭದಲ್ಲಿ ಜರುಗಿತು. ನನ್ನ ಪಕ್ಕದ ಮನೆಯ ವಯಸ್ಸಾದ ಹಿರಿಯರು ಎದೆನೋವಿನಿಂದ ಹಾಸಿಗೆಹಿಡಿದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿರುವರು. ಅವರ ಆರೋಗ್ಯ ವಿಚಾರಿಸಲೆಂದು ಹೋದಾಗ ಅವರು ನುಡಿದಿದ್ದು ಹೀಗೆ-‘ಈಗೀಗ ಸಾವು ಯಾವ ಸಮಯದಲ್ಲಾದರೂ ಬರಬಹುದೆಂದು ಅನಿಸಲಾರಂಭಿಸಿದೆ. ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವಾಗ ಬದುಕಿನ ಸತ್ಯ ದರ್ಶನವಾಯಿತು. ನಾನು ಇದುವರೆಗೂ ಬದುಕಿನಲ್ಲಿ ಸಾಧಿಸಿರುವುದೇನು ಎಂದು ಅನಿಸಲಾರಂಭಿಸಿದೆ. ಇದುವರೆಗಿನ ಆಯುಷ್ಯನ್ನು ಸ್ವಂತದ ಬದುಕನ್ನು ಕಟ್ಟಿಕೊಳ್ಳುವುದರಲ್ಲೇ ಕಳೆದದ್ದಾಯಿತು. ಈಗ ಉಳಿದಿರುವ ಆಯುಷ್ಯದಲ್ಲಿ ಬೇರೆಯವರಿಗಾಗಿ ಬದುಕಬೇಕೆನ್ನುವ ಪ್ರಜ್ಞೆ ಮೂಡಿದೆ. ದುಡಿದು ಗಳಿಸಿದ್ದರಲ್ಲಿ ಒಂದಿಷ್ಟನ್ನು ಸಮಾಜಕ್ಕೆ ನೀಡಬೇಕೆನ್ನುವ ಬಯಕೆ ಪ್ರಬಲವಾಗುತ್ತಿದೆ’.

‘ಜಾತಸ್ಯ ಮರಣಂ ಧ್ರುವಂ’ ಎಂದು ಭಗವದ್ಗೀತೆಯಲ್ಲಿ ಹೇಳಲಾಗಿದೆ. ಹುಟ್ಟು ಆಕಸ್ಮಿಕ ಆದರೆ ಸಾವು ಅನಿವಾರ್ಯ ಎಂದಿರುವರು ಚಿಂತಕರು. ‘ಮೋಹದ ಹೆಂಡತಿ ತೀರಿದ ಬಳಿಕ ಮಾವನ ಮನೆಯ ಹಂಗಿನ್ಯಾತಕೋ’ ಎಂದು ಅನುಭಾವಿಗಳು ಸಾವಿನ ಅನಿವಾರ್ಯತೆಯನ್ನು ತಿಳಿಸಿಕೊಟ್ಟಿರುವರು. ‘ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯ’ ಎಂದು ಹಾಡಿರುವರು ಕನಕದಾಸರು. ಇಷ್ಟೆಲ್ಲ ಹಿನ್ನೆಲೆಯಿದ್ದೂ ಮನುಷ್ಯ ಚಿರಂಜೀವಿತ್ವದ ಭಾವನೆಯಿಂದ ಸೇಡು, ದ್ವೇಷ, ಕ್ರೌರ್ಯ, ಶೋಷಣೆಯ ಗುಣಗಳನ್ನು ಮೈಗೂಡಿಸಿಕೊಂಡು ಮೃಗೀಯವರ್ತನೆಯನ್ನು ತೋರಿಸುತ್ತಿರುವನು. ಅಮರತ್ವದ ಭಾವನೆ ಮುನ್ನೆಲೆಗೆ ಬಂದು ಬದುಕಿನ ಕ್ಷಣಿಕತೆಯ ಅರಿವು ಹಿನ್ನೆಲೆಗೆ ಸರಿದಿದೆ. ವಿಮರ್ಶಕ ಜಿ.ಎಸ್.ಆಮೂರ ಅವರು ಹೇಳಿದಂತೆ ಮನುಷ್ಯ ನಾಗರಿಕನಾಗಿ ಎಷ್ಟೇ ಮುಂದುವರೆದರೂ ಅವನ ಮೂಲ ಪ್ರವೃತ್ತಿಗಳಾದ ಕಾಮ, ಕ್ರೋಧ ಮತ್ತು ದ್ವೇಷ ಇವುಗಳಿಂದ ಬಿಡುಗಡೆ ಹೊಂದಲು ಇವತ್ತಿಗೂ ಸಾಧ್ಯವಾಗುತ್ತಿಲ್ಲ. ಒಟ್ಟಾರೆ ನ್ಯಾಯ-ಅನ್ಯಾಯ, ಸತ್ಯ-ಸುಳ್ಳು, ಅಹಿಂಸೆ-ಹಿಂಸೆ, ನೈತಿಕ-ಅನೈತಿಕ ಇವುಗಳ ನಡುವಣ ಗೆರೆ ಬಹಳ ತೆಳುವಾಗುತ್ತಿದ್ದು ಮನುಷ್ಯ ಸಾವಿನ ಪ್ರಜ್ಞೆಯನ್ನು ಕಳೆದುಕೊಳ್ಳುತ್ತಿರುವನು. 

ಸಾವೆನ್ನುವುದು ಸತ್ತ ನಂತರವೂ ಬೇರೆಯವರ ಮೂಲಕ ಬದುಕಲು ದಂಡನೆಗೆ ಒಳಗಾದಂತೆ ಎಂದಿರುವ ಫ್ರೆಂಚ್ ಲೇಖಕ ಸಾರ್ತ್ರೆ ಸಾವನ್ನು ಅರ್ಥೈಸಿದ್ದು ಹೀಗೆ- ‘ಸಾವು ವ್ಯಕ್ತಿಯ ಬಾಳಿನ ಭೂತವನ್ನು ಬದಲಾಯಿಸಲು ಒಂದು ನಿರ್ಧಿಷ್ಟತೆ ತಂದುಬಿಡುತ್ತದೆ. ಆದ್ದರಿಂದ ಸತ್ತ ನಂತರದ ಬಾಳು ಬದುಕಿರುವವರ ಸ್ವತ್ತಾಗುತ್ತದೆ. ಅದನ್ನು ಅವರು ಬೇಕಾದರೆ ಉಳಿಸಿಕೊಳ್ಳಬಹುದು ಅಥವಾ ಅದನ್ನು ಕತ್ತಲೆಗೆ ತಳ್ಳುವುದರ ಮೂಲಕ ಅದಕ್ಕೆ ಎರಡನೆಯ ಸಾವನ್ನು ತರಬಹುದು’.

ಸಾವು ಬರಹಗಾರರನ್ನು ಮತ್ತು ಚಿಂತಕರನ್ನು ನಿರಂತರವಾಗಿ ಕಾಡಿದ ವಸ್ತುವಾಗಿದೆ. ಕತೆ, ಕಾದಂಬರಿ, ಆತ್ಮಕಥೆಗಳಲ್ಲಿ ಸಾವು ಮತ್ತೆ ಮತ್ತೆ ಗಾಢವಾಗಿ ಚರ್ಚೆಗೊಳಗಾಗಿದೆ. ಪಿ.ಲಂಕೇಶ್ ತಮ್ಮ ಆತ್ಮಚರಿತ್ರೆ ‘ಹುಳಿಮಾವಿನ ಮರ’ದಲ್ಲಿ ಸಾವಿನ ಕುರಿತು ಹೀಗೆ ಹೇಳಿಕೊಂಡಿರುವರು, ‘ನನ್ನ ಗಾಢ, ದುಗುಡದ ವೇಳೆಯಲ್ಲಿ ಸಾವಿನ ಹತ್ತಿರ ಇದ್ದಂತಿದ್ದಾಗ ಮುತ್ಸದ್ದಿತನ, ಹೊಂದಾಣಿಕೆ, ಖ್ಯಾತಿ, ಪ್ರಶಸ್ತಿ ಮುಂತಾದವೆಲ್ಲ ಬದುಕಿನೆದುರು, ಸಾವಿನೆದುರು ಗೌಣ ಅನ್ನಿಸುತ್ತಿದ್ದಾಗ ನನ್ನ ಬರವಣಿಗೆಯ ರೀತಿಯೂ ಬದಲಾಯಿತು. ಸಾವು ಇನ್ನು ಮೇಲೆ ನನಗೆ ಕೇವಲ ಕತೆಯಾಗದೆ, ಬದುಕುವ ಅಂತ್ಯ ಎಂಬ ಸತ್ಯ ಮಾತ್ರವಾಗದೆ ನನ್ನ ಉಳಿದ ದಿನಗಳಲ್ಲಿ, ಬರೆದ ಸಾಲುಗಳಲ್ಲಿ ನೆಲೆಸಿ ಎಚ್ಚರಿಸುವ ಛಾಯೆ ಅನ್ನಿಸತೊಡಗಿತು’. 

ಸಾವಿನ ನೆನಪು ಬದುಕನ್ನು ಅರ್ಥಪೂರ್ಣವಾಗಿಸಿದೆ ಎಂದು ಧನಾತ್ಮಕವಾಗಿ ಯೋಚಿಸುವವರೂ ನಮ್ಮ ನಡುವಿದ್ದಾರೆ. ಮನುಷ್ಯ ಸಾಯದೆ ಇದ್ದರೆ ಈ ಜಗತ್ತು ಎಷ್ಟೊಂದು ಅಸಹ್ಯವಾಗಿರುತ್ತಿತ್ತು ಎಂದು ಚಿಂತಿಸಿದ ಅನಂತಮೂರ್ತಿ ಅವರ ಮಾತಿನಲ್ಲಿ ಸಾವಿನಪ್ರಜ್ಞೆ ಇದೆ. ಸಾವಿಲ್ಲದ ಮನೆಯ ಸಾಸಿವೆಕಾಳು ತರಲು ಹೇಳಿ ಕಿಸಾಗೌತಮಿಗೆ ಸಾವಿನ ಅಸ್ತಿತ್ವದ ಅರಿವು ಮೂಡಿಸಿದ ಬುದ್ಧನ ನಾಡಿನಲ್ಲಿ ಸಾವು ನಮ್ಮನ್ನು ಎಚ್ಚರಿಸುವ ಪ್ರಜ್ಞೆಯಾಗಬೇಕು. ಮೌಲ್ಯಗಳು ಅಪಮೌಲ್ಯಗೊಳ್ಳುತ್ತ ಅನೈತಿಕತೆ, ಅಪ್ರಾಮಾಣಿಕತೆಗಳು ವಿಜೃಂಭಿಸುತ್ತಿರುವಾಗ ಸಾವಿನ ಪ್ರಜ್ಞೆಯಲ್ಲಿ ಬದುಕು ಅರಳಬೇಕಿರುವುದು ಇಂದಿನ ತುರ್ತು ಅಗತ್ಯವಾಗಿದೆ.

-ರಾಜಕುಮಾರ ಕುಲಕರ್ಣಿ