Sunday, February 4, 2024

ಲಯ ತಪ್ಪಿದ ವಿಶ್ವವಿದ್ಯಾಲಯ

  




(೧೯.೧೨.೨೦೨೩ ರ ಪ್ರಜಾವಾಣಿಯಲ್ಲಿ ಪ್ರಕಟ)

   ‘ಪ್ರಪಾತಕ್ಕೆ ಸರ್ಕಾರಿ ವಿಶ್ವವಿದ್ಯಾಲಯಗಳು’ ವಿಶೇಷ ವರದಿ (ಪ್ರ.ವಾ., ಡಿ. 10) ವಿಶ್ವವಿದ್ಯಾಲಯಗಳ ದುಸ್ಥಿತಿಗೆ ಕನ್ನಡಿ ಹಿಡಿದಂತಿದೆ. ಅನುದಾನದ ಕೊರತೆ, ಹಣಕಾಸಿನ ದುರ್ಬಳಕೆ, ಸರ್ಕಾರದ ಹಸ್ತಕ್ಷೇಪ ಇತ್ಯಾದಿ ಸಮಸ್ಯೆಗಳು ವಿಶ್ವವಿದ್ಯಾಲಯಗಳನ್ನು ಪ್ರಪಾತಕ್ಕೆ ತಳ್ಳಿವೆ. ಇಂಥ ಸನ್ನಿವೇಶದಲ್ಲಿ ಗುಣಮಟ್ಟದ ಸಂಶೋಧನೆ ಮತ್ತು ದಕ್ಷ, ಪ್ರಾಮಾಣಿಕ ಹಾಗೂ ಸಾಮಾಜಿಕ ಕಾಳಜಿಯುಳ್ಳ ಭವಿಷ್ಯದ ನೇತಾರರನ್ನು ರೂಪಿಸುವಂತಹ ಮಹತ್ವದ ಜವಾಬ್ದಾರಿಯನ್ನು ವಿವಿಗಳು ನಿರ್ವಹಿಸುವುದಾದರೂ ಹೇಗೆ?. ಈ ಎರಡು ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವಿಶ್ವವಿದ್ಯಾಲಯ ಸಹಜವಾಗಿಯೇ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುತ್ತದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ರೇಷ್ಠ ವಿಶ್ವವಿದ್ಯಾಲಯಗಳೆಂದು ಆಯ್ಕೆಯಾಗುವ ಬಹುತೇಕ ವಿಶ್ವವಿದ್ಯಾಲಯಗಳು ಸಂಶೋಧನೆ ಮತ್ತು ಭವಿಷ್ಯದ ನೇತಾರರ ತಯ್ಯಾರಿಗೆ ಹೆಚ್ಚು ಒತ್ತು ಕೊಡುವುದನ್ನು ಕಾಣಬಹುದು. 

ನಾನು ಸ್ನಾತಕೋತ್ತರ ಪದವಿ ಪಡೆದ ವಿಶ್ವವಿದ್ಯಾಲಯದ ವಿಭಾಗಕ್ಕೆ ಕೆಲವು ದಿನಗಳ ಹಿಂದೆ ಭೇಟಿ ನೀಡುವ ಸಂದರ್ಭ ಎದುರಾಯಿತು. ಒಂದು ಕಾಲದಲ್ಲಿ ಏಳೆಂಟು ಜನ ಪೂರ್ಣಕಾಲಿಕ ಬೋಧಕರು ಬೋಧನೆ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದ ವಿಭಾಗದಲ್ಲಿ ಇಂದು ಪೂರ್ಣಕಾಲಿಕ ಬೋಧಕರ ಸಂಖ್ಯೆ ಸೊನ್ನೆ. ಅರೆಕಾಲಿಕ ಉಪನ್ಯಾಸಕರಿಂದ ಸ್ನಾತಕೋತ್ತರ ಕೋರ್ಸಿನ ಎರಡು ತರಗತಿಗಳ ಪಾಠ ಪ್ರವಚನ ನಿರ್ವಹಿಸಬೇಕಾದ ಸನ್ನಿವೇಶ ಎದುರಾಗಿದೆ. ಪೂರ್ಣಕಾಲಿಕ ಬೋಧಕರಿಲ್ಲದ ಕಾರಣ ಸಂಶೋಧನೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪರಿಣಾಮವಾಗಿ ಶೈಕ್ಷಣಿಕ ಗುಣಮಟ್ಟ ಇಳಿಮುಖವಾಗಿ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿರುವರು. 

ಇದು ಕೇವಲ ಒಂದು ವಿಶ್ವವಿದ್ಯಾಲಯದ ಚಿತ್ರಣವಲ್ಲ. ರಾಜ್ಯದ ಬಹಳಷ್ಟು ವಿಶ್ವವಿದ್ಯಾಲಯಗಳು ಇಂದು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಕೊರತೆಯನ್ನು ಎದುರಿಸುತ್ತಿವೆ. ಅನೇಕ ವಿಭಾಗಗಳಲ್ಲಿ ಪೂರ್ಣಕಾಲಿಕ ಬೋಧಕರಿಲ್ಲದೆ ಅರೆಕಾಲಿಕ ಬೋಧಕರನ್ನು ನೆಚ್ಚಿಕೂಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ವಿಶ್ವವಿದ್ಯಾಲಯಗಳ ಸಿಬ್ಬಂದಿಗೆ ನಿಯಮಿತವಾಗಿ ವೇತನ ಪಾವತಿಯಾಗುತ್ತಿಲ್ಲ ಎನ್ನುವ ದೂರು ಸಾಮಾನ್ಯವಾಗಿದೆ. ಕೆಲವು ವಿಶ್ವವಿದ್ಯಾಲಯಗಳು ಕಟ್ಟಡ ಮತ್ತು ಅಗತ್ಯದ ಪೀಠೋಪಕರಣಗಳಿಲ್ಲದೆ ಮುಚ್ಚಬೇಕಾದ ಸ್ಥಿತಿಗೆ ಬಂದು ನಿಂತಿವೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳಲ್ಲಿನ ಸಮಸ್ಯೆಗಳೇ ಬೆಟ್ಟದಷ್ಟಿರುವಾಗ ಇನ್ನು ಜಿಲ್ಲೆಗೊಂದು ವಿಶ್ವವಿದ್ಯಾಲಯ ಸ್ಥಾಪಿಸುವುದು ಆತುರದ ನಿರ್ಧಾರವಾಗುತ್ತದೆ. ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿರುವುದರಿಂದ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಕೋರ್ಸುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿರುವ ಸಂದರ್ಭ ವಿಶ್ವವಿದ್ಯಾಲಯಗಳ ಸಂಖ್ಯೆಯನ್ನು ಹೆಚ್ಚಿಸುವುದು ಸರಿಯಲ್ಲ. ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಬದಲು ಈಗ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕಾದದ್ದು ಅಗತ್ಯವಾಗಿದೆ. ಹೊಸ ವಿವಿಗಳ ಸ್ಥಾಪನೆ ಸಧ್ಯಕ್ಕಿಲ್ಲ ಎಂದಿರುವ ಉನ್ನತ ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ.

ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ ಎನ್ನುವುದು ನಿಂತ ನೀರಾಗಿದೆ. ಸಂಶೋಧನೆಯಲ್ಲಿ ಗುಣಮಟ್ಟದ ಕೊರತೆಯು ಎದ್ದು ಕಾಣುತ್ತಿದೆ. ಇತ್ತೀಚೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ನಾತಕೋತ್ತರ ಸಂಶೋಧನಾ ಪ್ರಬಂಧದ (ಥೀಸಿಸ್) ಬರವಣಿಗೆ ಸಂಬಂಧಿತ ಶೀರ್ಷಿಕೆಗಳ ಪಟ್ಟಿಯನ್ನು ತಯ್ಯಾರಿಸಿದೆ. 24 ವೈದ್ಯಕೀಯ ವಿಷಯಗಳಿಗೆ ಸಂಬಂಧಪಟ್ಟ ಸುಮಾರು 1400 ಕ್ಕಿಂತ ಹೆಚ್ಚು ಶೀರ್ಷಿಕೆಗಳು ಈ ಪಟ್ಟಿಯಲ್ಲಿವೆ. ಪ್ರಸ್ತುತ ವೈದ್ಯಕೀಯ ವಿದ್ಯಾರ್ಥಿಗಳು ಆಯ್ಕೆಮಾಡಿಕೊಳ್ಳುತ್ತಿರುವ ಸಂಶೋಧನಾ ಶೀರ್ಷಿಕೆಗಳು ಗುಣಮಟ್ಟದ್ದಾಗಿಲ್ಲ ಎನ್ನುವ ಕಾರಣದಿಂದ ಆಯೋಗವೇ ಮುಂದಾಗಿ ಶೀರ್ಷಿಕೆಗಳನ್ನು ತಯ್ಯಾರಿಸಿದೆ. ಈ ಮಾತು ಬರೀ ವೈದ್ಯಕೀಯ ಕ್ಷೇತ್ರದಲ್ಲಿನ ಸಂಶೋಧನೆಗೆ ಮಾತ್ರವಲ್ಲ ಎಲ್ಲ ವಿಷಯಗಳಿಗೂ ಅನ್ವಯಿಸುತ್ತದೆ. ಒಟ್ಟಾರೆ ವೇತನ ಬಡ್ತಿ ಮತ್ತು ಉದ್ಯೋಗ ಬಡ್ತಿ ಸಂಶೋಧನೆಯ ಮೊದಲ ಆದ್ಯತೆಯಾಗಿದೆ. ಒಮ್ಮೆ ಸಂಶೋಧನೆ ಪೂರ್ಣಗೊಳಿಸಿ ಡಾಕ್ಟರೇಟ್ ಪದವಿ ಪಡೆದವರು ಮತ್ತೆ ಸಂಶೋಧನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ವಿರಳ.

ಭವಿಷ್ಯದ ನೇತಾರರನ್ನು ರೂಪಿಸುವ ಜವಾಬ್ದಾರಿಯಲ್ಲೂ ವಿಶ್ವವಿದ್ಯಾಲಯಗಳು ಎಡವುತ್ತಿವೆ. ಸಂವಾದ, ಚರ್ಚೆ, ಗೋಷ್ಠಿಗಳಿಗೆ ಮುಕ್ತವೇದಿಕೆಯಾಗಬೇಕಾದ ವಿಶ್ವವಿದ್ಯಾಲಯಗಳು ಆಳುವ ಸರ್ಕಾರಗಳ ಕೈಗೊಂಬೆಯಂತೆ ವರ್ತಿಸುತ್ತಿವೆ. ಚರ್ಚೆ ಮತ್ತು ಸಂವಾದಗಳು ಆಳುವ ಸರ್ಕಾರಗಳ ಮುಖಸ್ತುತಿಗೆ ಸೀಮಿತವಾಗುತ್ತಿವೆ. ಕಾಲಕಾಲಕ್ಕೆ ಅಸ್ತಿತ್ವಕ್ಕೆ ಬರುವ ಸರ್ಕಾರಗಳ ಚಹರೆ ಅಥವಾ ಮುಖವಾಡ ವಿಶ್ವವಿದ್ಯಾಲಯಗಳಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿದೆ. ಆಯಾ ಸರ್ಕಾರಗಳು ತಮ್ಮ ಸೈದ್ಧಾಂತಿಕ ನೆಲೆಯನ್ನು ವಿಸ್ತರಿಸಲು ವಿಶ್ವವಿದ್ಯಾಲಯಗಳನ್ನು ವೇದಿಕೆಯಾಗಿ ಬಳಸಿಕೊಳ್ಳುತ್ತಿವೆ. ಇದಕ್ಕೆ ಅನುಗುಣವಾಗಿ ವಿಶ್ವವಿದ್ಯಾಲಯಗಳ ಆಯಕಟ್ಟಿನ ಸ್ಥಾನಗಳನ್ನು ಕಾಲಕಾಲಕ್ಕೆ ಅಧಿಕಾರದ ಚುಕ್ಕಾಣಿ ಹಿಡಿಯುವ ರಾಜಕೀಯ ಪಕ್ಷಗಳ ಹಿಂಬಾಲಕರು ಆಕ್ರಮಿಸಿಕೊಳ್ಳುತ್ತಿರುವರು. ಕೆಲವು ರಾಜ್ಯಗಳಲ್ಲಿ ವಿಶ್ವವಿದ್ಯಾಲಯಗಳ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಪೈಪೆÇೀಟಿ ಏರ್ಪಟ್ಟಿದೆ. ಇದು ಆರೋಗ್ಯಕರ ಬೆಳೆವಣಿಗೆಯಲ್ಲ. ಇಂಥ ಸನ್ನಿವೇಶದಲ್ಲಿ ದಕ್ಷ, ಪ್ರಾಮಾಣಿಕ ಮತ್ತು ಸಾಮಾಜಿಕ ಕಳಕಳಿಯುಳ್ಳ ಭವಿಷ್ಯದ ನೇತಾರರನ್ನು ರೂಪಿಸುವಲ್ಲಿ ವಿಶ್ವವಿದ್ಯಾಲಯಗಳು ವಿಫಲವಾಗುತ್ತಿವೆ. 

ವಿಶ್ವವಿದ್ಯಾಲಯಗಳನ್ನು ಆವರಿಸಿಕೊಂಡಿರುವ ಜಡತ್ವದಲ್ಲಿ ಬೋಧಕರ ಪಾತ್ರವನ್ನು ಕೂಡ ಕಡೆಗಣಿಸುವಂತಿಲ್ಲ. ಪಾಠ ಮತ್ತು ಸಂಶೋಧನೆಗಿಂತ ಸೆನೆಟ್, ಸಿಂಡಿಕೇಟ್‍ಗಳ ಚುನಾವಣೆ ಹಾಗೂ ಉನ್ನತ ಹುದ್ದೆಗಳ ಲಾಬಿಗಾಗಿ ಸರ್ಕಾರದ ಓಲೈಕೆಯಲ್ಲಿ ಬೋಧಕರ ಹೆಚ್ಚಿನ ಸಮಯ ವಿನಿಯೋಗವಾಗುತ್ತಿದೆ. ಜಾತಿ ಮತ್ತು ಧರ್ಮ ವಿಶ್ವವಿದ್ಯಾಲಯದ ಬೋಧಕ ಹಾಗೂ ವಿದ್ಯಾರ್ಥಿ ಗಣವನ್ನು ವ್ಯವಸ್ಥಿತವಾಗಿ ವಿಭಾಗಿಸುತ್ತಿವೆ. ಅಧ್ಯಾಪಕರು ವಿಶ್ವಮಾನವ ಪ್ರಜ್ಞೆಯ ಭವಿಷ್ಯದ ನೇತಾರರನ್ನು ರೂಪಿಸುವ ಬದಲು ಜಾತಿ ಮತ್ತು ಧರ್ಮಗಳ ಚೌಕಟ್ಟಿಗೆ ಸೀಮಿತಗೊಳ್ಳುತ್ತಿರುವ ಸಂಕುಚಿತ ಮನಸ್ಸಿನ ನಾಗರಿಕರನ್ನು ಸೃಷ್ಟಿಸುತ್ತಿರುವರು.

ಪ್ರಸ್ತುತ ಸಂದರ್ಭದಲ್ಲಿ ವಿಶ್ವವಿದ್ಯಾಲಯಗಳನ್ನು ಆರ್ಥಿಕವಾಗಿ ಸದೃಢಗೊಳಿಸುವುದು, ಭ್ರಷ್ಟಾಚಾರ ಮುಕ್ತಗೊಳಿಸುವುದು, ಆವರಿಕೊಂಡಿರುವ ಪ್ರಭುತ್ವದ ಚಹರೆಯನ್ನು ತೆಗೆದುಹಾಕುವುದು, ಬೋಧಕಗಣವನ್ನು ಜಾತಿ-ಧರ್ಮದ ಸಂಕೋಲೆಯಿಂದ ಹೊರತರುವುದು ಮತ್ತು ಬೋಧನೆ ಹಾಗೂ ಸಂಶೋಧನೆಯ ಗುಣಮಟ್ಟವನ್ನು ಹೆಚ್ಚಿಸುವುದು ತುರ್ತು ಅಗತ್ಯವಾಗಿದೆ. ವಿಶ್ವವಿದ್ಯಾಲಯಗಳು ಮುಕ್ತವಾಗಿ ಕಾರ್ಯನಿರ್ವಹಿಸಲು ತೊಡಗಿದಾಗ ಸಂಶೋಧನೆಯ ಗುಣಮಟ್ಟ ಹೆಚ್ಚುತ್ತದೆ ಮತ್ತು ಭವಿಷ್ಯದ ಪ್ರಜ್ಞಾವಂತ ನೇತಾರರು ರೂಪುಗೊಳ್ಳುತ್ತಾರೆ. ಸಧ್ಯದ ನಿರೀಕ್ಷೆ ಕೂಡ ಇದೇ ಆಗಿದೆ.

-ರಾಜಕುಮಾರ ಕುಲಕರ್ಣಿ


No comments:

Post a Comment